ಔರಾದ್ ಕ್ಷೇತ್ರದಲ್ಲೆಲ್ಲ ಜೆಜೆಎಂ ಕಾಮಗಾರಿ ಕಳಪೆ ರಸ್ತೆಯು ಸರಿಪಡಿಸದೆ ನೀರು ನಿಂತು ಜನರಿಗೆ ತೊಂದರೆ ಆಗುತ್ತಿದೆ ಇದಕ್ಕೆ ಅಧಿಕಾರಿಗಳು, ಗುತ್ತಿಗೆದಾರರೇ ಹೊಣೆ: ಪ್ರಭು ಚವ್ಹಾಣ ಆಕ್ರೋಶ

ಔರಾದ್ : ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಔರಾದ(ಬಿ) ಮತಕ್ಷೇತ್ರದಲ್ಲಿ ನಡೆದ ಎಲ್ಲ ಕಾಮಗಾರಿಗಳು ಸಂಪೂರ್ಣ ಕಳಪೆಯಾಗಿವೆ. ಯಾವ ಗ್ರಾಮಕ್ಕೆ ಬೇಟಿ ನೀಡಿದರೂ ಜೆಜೆಎಂ ಲೋಪಗಳ ಕುರಿತು ದೂರುಗಳು ಬರುತ್ತಿವೆ. ಇದಕ್ಕೆ ಅಧಿಕಾರಿಗಳು ಮತ್ತು ಗುತ್ತಿಗೆದಾರರೇ ಹೊಣೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಬೇಕೆಂಬ ಉದ್ದೇಶದಿಂದ 200 ಕೋಟಿಗೂ ಹೆಚ್ಚು ಅನುದಾನ ತಂದು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 276 ಕಾಮಗಾರಿಗಳ ಪೈಕಿ ಬಹುತೇಕ ಎಲ್ಲ ಕಾಮಗಾರಿಗಳು ಕಳಪೆಯಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಪೈಪ್‌ಲೈನ್‌ಗಾಗಿ ಅಗೆದ ರಸ್ತೆಗಳನ್ನು ಸರಿಪಡಿಸದೇ ಬಿಡಲಾಗಿದೆ. ಕೊಳಚೆಯಲ್ಲಿಯೇ ಪೈಪ್‌ಲೈನ್ ಮಾಡಲಾಗಿದೆ. ಕೆಲವೆಡೆ ನೀರಿನ ಟ್ಯಾಪ್‌ಗಳೇ ಇಲ್ಲ. ನೀರಿನ ಟ್ಯಾಂಕ್‌ಗಳು ಸರಿಯಾಗಿಲ್ಲ. ಜಲ ಮೂಲಗಳು ಇಲ್ಲದ ಕಡೆ ಕಾಮಗಾರಿ ಪೂರ್ಣಗೊಳಿಸಿದ್ದು, ಅಲ್ಲಿ ಕುಡಿಯಲು ನೀರು ಸಿಗುತ್ತಿಲ್ಲ. ಹಲವು ಕಡೆ ಕೆಲಸವಾದರೂ ನೀರು ಸರಬರಾಜು ಆಗುತ್ತಿಲ್ಲ. ಇಂತಹ ಹತ್ತು ಹಲವಾರು ಸಮಸ್ಯೆಗಳು ಪ್ರತಿ ಹಳ್ಳಿಯಲ್ಲಿಯೂ ಕಾಣಿಸುತ್ತಿವೆ. ಕಾಮಗಾರಿಗಾಗಿ ಅಗೆದ ರಸ್ತೆಗಳನ್ನು ಸರಿಪಡಿಸದೇ ಬಿಡಲಾಗಿದೆ. ಮಳೆ ನೀರಿನಿಂದ ಗುಂಡಿಗಳು ತುಂಬಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ಇದರಿಂದಾಗಿ ಡೆಂಗ್ಯೂ, ಮಲೇರಿಯಾ, ಚಿಕುನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದೆ. ಇದಕ್ಕೆಲ್ಲ ಯಾರು ಜವಾಬ್ದಾರರು ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.

ಇದರ ಬಗ್ಗೆ ವಿಧಾನಸಭಾ ಅಧಿವೇಶದಲ್ಲಿ ವಿಷಯ ಎತ್ತುತ್ತೇನೆ. ಜನತೆಗಾಗಿ ಉಪವಾಸ ಸತ್ಯಾಗ್ರಹ ಮಾಡಲು ಹಿಂಜರಿಯುವುದಿಲ್ಲ ಎಂದು ತಿಳಿಸಿದರು.

ಧಮ್ಮಾನಾಯಕ್ ತಾಂಡಾ, ಜಂಬಗಿ, ಮಸ್ಕಲ್ ತಾಂಡಾ, ಮಣಿಗೆಂಪೂರ, ಬಾಬಳಿ, ಕೌಡಗಾಂವ, ಆಲೂರ(ಕೆ), ಆಲೂರ(ಬಿ), ಬೇಲೂರ, ಆಲೂರ ತಾಂಡಾ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಎಲ್ಲ ಬಿಲ್ಲುಗಳನ್ನು ಪಾವತಿಸಲಾಗಿದೆ. ಆದರೆ ಕೆಲಸ ಪೂರ್ಣಗೊಳಿಸಿಲ್ಲ. ಕ್ಷೇತ್ರದಲ್ಲಿ ಸೇ.85ರಷ್ಟು ಬಿಲ್ಲುಗಳನ್ನು ಪಾವತಿಸಲಾಗಿದೆ ಜೆಜೆಎಂ ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದರು.

ಕಾಮಗಾರಿಯನ್ನು ಸಮರ್ಪಕವಾಗಿ ಮಾಡದೆ ಇರುವ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು

ಜೆಜೆಎಂ ಯೋಜನೆ ಅಡಿಯಲ್ಲಿ ಕಾಮಗಾರಿ ನಡೆದ ಗ್ರಾಮಗಳಲ್ಲಿ ಸುಮಾರು 30 ವರ್ಷ ಕುಡಿಯುವ ನೀರಿನ ಯೋಜನೆಗೆ ಅನುದಾನ ಬರುವುದಿಲ್ಲ. ಕುಡಿಯುವ ನೀರಿನ ಸಮಸ್ಯೆ ಪಂಚಾಯಿತಿಗಳಿಗೆ ಎದುರಾಗುವುದರಿಂದ ಎಲ್ಲ ಪಿಡಿಓಗಳು ಕೆಲಸ ಸಂಪೂರ್ಣ ಮುಗಿಯುವ ವರೆಗೆ ಯಾವುದೇ ಕಾರಣಕ್ಕೂ ಕಾಮಗಾರಿ ಅಧಿನಕ್ಕೆ ಪಡೆಯಬಾರದು. ಇಲ್ಲವಾದರೆ ಸಮಸ್ಯೆಗೆ ಸಿಲುಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಭೆಯಲ್ಲಿ ಔರಾದ(ಬಿ) ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರಸಿಂಗ್ ಠಾಕೂರ್, ಕಮಲನಗರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ರಾಮಲಿಂಗ ಬಿರಾದಾರ, ಜೆಸ್ಕಾಂ ಎಇಇ ರವಿ ಕಾರಬಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸಭೆಯಲ್ಲಿ ಉಪಸ್ಥಿತರಿದ್ದರು.