ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಬಾಗಪ್ಪ ಹರಿಜನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಇಂಡಿ ತಾಲ್ಲೂಕಿನ ಅಗರಖೇಡದ ಪ್ರಕಾಶ ಅಲಿಯಾಸ್ ಪಿಂಟು ಮೇಲಿನಕೇರಿ(26), ಹೊರ್ತಿಯ ರಾಹುಲ ತಳಕೇರಿ(20), ಅಗರಖೇಡದ ಸುದೀಪ ಕಾಂಬಳೆ (20) ಹಾಗೂ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಮಣಿಕಂಠ ಅಲಿಯಾಸ್ ಗದಿಗೆಪ್ಪ ಬೆನಕೊಪ್ಪ (27) ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.ಆರೋಪಿತರಿಂದ ಕೃತ್ಯಕ್ಕೆ ಬಳಸಲಾದ ಆಯುಧ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ವಿಜಯಪುರ ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ಫೆ.11ರಂದು ರಾತ್ರಿ 9.30ರ ಸುಮಾರಿಗೆ ದುಷ್ಕರ್ಮಿಗಳು ಸೇರಿಕೊಂಡು ಬಾಗಪ್ಪ ಹರಿಜನನನ್ನು ಪಿಸ್ತೂಲ್ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆ ಮತ್ತು ಕೈಗಳನ್ನು ಕೊಚ್ಚಿ ಕೊಲೆ ಮಾಡಿದ್ದರು ಎಂದು ಹೇಳಿದರು.
ಕೊಲೆಯಾದ ಬಾಗಪ್ಪ ಹರಿಜನ ಮೇಲೆ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಅಫಜಲಪುರ ಪೊಲೀಸ್ ಠಾಣೆಯಲ್ಲಿ 1 ಕೊಲೆ ಪ್ರಕರಣ ಸೇರಿದಂತೆ ಒಟ್ಟು 6 ಕೊಲೆ ಪ್ರಕರಣಗಳು ದಾಖಲಾಗಿದ್ದವು ಎಂದರು.
ವಿಜಯಪುರ ನಗರದಲ್ಲಿ ಆರು ತಿಂಗಳ ಹಿಂದೆ ಬಾಗಪ್ಪ ಹರಿಜನ ಸೂಚನೆ ಮೇರೆಗೆ ವಕೀಲ ರವಿ ಮೇಲಿನಕೇರಿ ಎಂಬುವವರಿಗೆ ತುಳಸಿರಾಮ ಹರಿಜನ ಹಾಗೂ ಆತನ ಸಹಚರರಾದ ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ, ರಾಜೇಸಾಬ ರುದ್ರವಾಡಿ ಸೇರಿಕೊಂಡು ಕೊಲೆ ಮಾಡಿದ್ದು, ಈ ಆರೋಪಿತರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದರು.
ಬಾಗಪ್ಪ ಹರಿಜನ ಹಾಗೂ ರವಿ ಮೇಲಿನಕೇರಿ ಸಂಬಂಧಿಕರಾಗಿದ್ದು, ಇವರಿಬ್ಬರ ನಡುವೆ ಕೆಲವು ವರ್ಷಗಳಿಂದ ಹಣಕಾಸಿನ ವ್ಯವಹಾರವಿದ್ದು, ಇಬ್ಬರೂ ಸೇರಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು ಎಂದರು.
ರವಿ ಮೇಲಿನಕೇರಿ ಕೊಲೆಯಾದ ನಂತರ ಬಾಗಪ್ಪ ಹರಿಜನ ಈತನು ರವಿ ಮೇಲಿನಕೇರಿಯ ತಮ್ಮನಾದ ಪ್ರಕಾಶ ಮೇಲಿನಕೇರಿಗೆ, ನಿಮ್ಮ ಅಣ್ಣ ನನ್ನ ಹೆಸರು ಹೇಳಿ ಹಣ, ಆಸ್ತಿ ಮತ್ತು ವಾಹನವನ್ನು ಮಾಡಿಕೊಂಡಿರುತ್ತಾನೆ. ಅವೆಲ್ಲವನ್ನು ನನಗೆ ಬಿಟ್ಟು ಕೊಡಬೇಕು ಎಂದು ಒತ್ತಡ ಹಾಕುತ್ತಿದ್ದು, ಹಲವಾರು ಬಾರಿ ಬೆದರಿಕೆ ಸಹ ಹಾಕಿದ್ದನು ಎಂದು ತಿಳಿಸಿದರು.
ಬಾಗಪ್ಪ ಹರಿಜನನು ಪ್ರಕಾಶ ಮೇಲಿನಕೇರಿಗೆ ನೀವು ಆಸ್ತಿ ಬಿಟ್ಟುಕೊಡಬೇಕು. ಇಲ್ಲದಿದ್ದರೆ ₹10 ಕೋಟಿ ಹಣ ಕೊಡಬೇಕು. ಅದೂ ಆಗದಿದ್ದರೆ ನಿಮ್ಮ ಅಣ್ಣನ ಹೆಂಡತಿಯನ್ನು ನನ್ನ ಹತ್ತಿರ ಕಳುಹಿಸು ಎಂದು ಅವಾಚ್ಯ ಪದ ಬಳಸಿ ಮಾತನಾಡಿರುತ್ತಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದರು.
ನಿಮ್ಮ ಅಣ್ಣನಿಗೆ ಹೇಗೆ ಹೊಡೆದಿರುತ್ತೇನೋ ಅದೇ ತರಹ ನಿನಗೂ ಹೊಡೆಯುತ್ತೇನೆ ಎಂದು ಧಮಕಿ ಹಾಕಿದ್ದರಿಂದ ಪ್ರಕಾಶ ಮೇಲಿನಕೇರಿ ಈತನಿಗೆ ತನ್ನ ಅಣ್ಣನ ಕೊಲೆ ಬಾಗಪ್ಪ ಹರಿಜನ ಈತನ ಸೂಚನೆ ಮೇರೆಗೆ ನಡೆದಿದೆ ಎಂಬುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಬಾಗಪ್ಪ ಹರಿಜನ ಈತನಿಗೆ ಮುಗಿಸಿ ಬಿಡಬೇಕು ಎಂದು ನಿರ್ಧರಿಸಿದ್ದಾರೆ ಎಂದರು.
ಪ್ರಕಾಶ ಮೇಲಿನಕೇರಿ ತನ್ನ ಸಂಬಂಧಿಕ ಹಾಗೂ ಸ್ನೇಹಿತರೊಂದಿಗೆ ಸಂಚು ರೂಪಿಸಿ ಫೆ.11 ರಂದು ರಾತ್ರಿ 9.30ರ ಸುಮಾರಿಗೆ ಬಾಗಪ್ಪ ಹರಿಜನ ತನ್ನ ಮನೆಯ ಹೊರಗಡೆ ವಾಕಿಂಗ್ ಮಾಡುತ್ತಿದ್ದಾಗ. ಆಟೋ ಹಾಗೂ ಬೈಕ್ನಲ್ಲಿ ಬಂದು ಪಿಸ್ತೂಲ್ನಿಂದ ಗುಂಡು ಹಾರಿಸಿ, ಕೊಡಲಿ, ಮಚ್ಚು ಹಾಗೂ ಚಾಕುವಿನಿಂದ ಹೊಡೆದು ಕೊಲೆ ಮಾಡಿದ್ದರು ಎಂದರು.