ಬೆಂಗಳೂರು (ಅಮೃತಹಳ್ಳಿ) : ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:24/05/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಠಾಣಾ ಸರಹದ್ದಿನ ಅಮೃತಹಳ್ಳಿ ಕೆರೆ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ಇಬ್ಬರು ವ್ಯಕ್ತಿಗಳು ನಿಷೇದಿತ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡು ಯವಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದಾಗಿ ಮಾಹಿತಿಯಲ್ಲಿ ತಿಳಿಸಿರಿರುತ್ತಾರೆ.
ಈ ಮಾಹಿತಿಯನ್ನಾಧರಿಸಿ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ಬಾತ್ಮೀದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ. ದಾಳಿ ಮಾಡಿ, ಹೊರ ರಾಜ್ಯದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳಿಬ್ಬರನ್ನು ವಿಚಾರಣೆಗೊಳಪಡಿಸಲಾಗಿ, ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಅವರುಗಳ ವಶದಲ್ಲಿದ್ದ 5 ಕೆ.ಜಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ 2,00.000/-(ಎರಡು ಲಕ್ಷ ರೂಪಾಯಿ).
ದಿನಾಂಕ:24/05/2025 ರಂದು ಆರೋಪಿಗಳಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, 3 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಗಳಿಬ್ಬರನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಪಶ್ಚಿಮ ಬಂಗಾಳ ರಾಜ್ಯದ, ಮರ್ಷಿದಾಬಾದ್ನಿಂದ ಪರಿಚಯವಿರುವ ವ್ಯಕ್ತಿಗಳಿಂದ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿ ಮಾಡಿಕೊಂಡು ಬಂದು, ಬೆಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಧಿಕ ಲಾಭ ಗಳಿಸುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:26/05/2025 ರಂದು ಆರೋಪಿಗಳಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು, ಈಶಾನ್ಯ ವಿಭಾಗ ಸಜೀತ್. ಐ.ಪಿ.ಎಸ್. ಸಹಾಯಕ ಪೊಲೀಸ್ ಆಯುಕ್ತರು, ಸಂಪಿಗೇಹಳ್ಳಿ ಉಪ ವಿಭಾಗ ಮುರುಗೇಂದ್ರಯ್ಯ ಸುವರ್ಣ ರವರ ಮಾರ್ಗದರ್ಶನದಲ್ಲಿ ಅಮೃತಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅಂಬರೀಶ್.ಎಂ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿರವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವರದಿ : ಮುಬಾರಕ್ ಬೆಂಗಳೂರು