ಹಾಸ್ಟೆಲ್ ಹಾಗೂ ವಸತಿ ನಿಲಯ-ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳು ತಮ್ಮ ಕಛೇರಿ ಮುಂದೆ ಹೋರಾಟ ಮಾಡಿ ಮನವಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 15-20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಚತಾಗಾರರು, ಕಾವಲುಗಾರರು, ಡಿ ಗ್ರೂಪ್ ಆಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ಗಳು, ಹೊರಗುತ್ತಿಗೆ ಶಿಕ್ಷಕರು. ದಿನಗೂಲಿ ನೌಕರರು ಯಾವುದೇ ಭದ್ರತೆ ಇಲ್ಲದೆ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿರುತ್ತಾರೆ. ಗುತ್ತಿಗೆದಾರರು, ವಾರ್ಡನ್ರವರು, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹೊರಗುತ್ತಿಗೆ ಸಿಬ್ಬಂದಿಗಳನ್ನು ಶೋಷಣೆ ಮಾಡುತ್ತಿದ್ದಾರೆ. ಹಾಗಾಗಿ ತಮ್ಮ ಕಛೇರಿಯ ಎದುರು ಹೋರಾಟ ಮಾಡಿ ಮನವಿ ಸಲ್ಲಿಸುತ್ತಿದ್ದು ಕೆಲವು ಸಮಸ್ಯೆಗಳನ್ನು ಚರ್ಚೆ ಮಾಡಲು ಸಭೆಯ ದಿನಾಂಕವನ್ನು ನಿಗದಿ ಮಾಡಬೇಕಾಗಿ ಮನವಿ.
-:ಬೇಡಿಕೆಗಳು:-
1) ತಿಂಗಳಿಗೆ ಕನಿಷ್ಠ ವೇತನ ಮಾಸಿಕ ರೂ.36 ಸಾವಿರ ಕೊಡಬೇಕು.
2) ನೇರವಾಗಿ ಇಲಾಖೆಯಿಂದ ವೇತನ ಕೊಡಬೇಕು.
3) ನಿವೃತ್ತಿವರೆಗೆ ಸೇವಾ ಭದ್ರತೆ ಕೊಡಬೇಕು.
4) ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ಕೊಡಬೇಕು. ಕೆಲಸದ ಸಮಯ ನಿಗಧಿ ಆಗಬೇಕು.
5) ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ(ನಿ)ವನ್ನು ಯಾದಗಿರಿ ಜಿಲ್ಲೆಯಲ್ಲಿ ಮಾಡಬೇಕು.
6) ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಐ.ಡಿ.ಕಾರ್ಡ್, ಸರ್ವೀಸ್ ಸರ್ಟಿಫಿಕೇಟ್, ESI ಮತ್ತು PF ಹಣ ತುಂಬಿದ ರಶೀದಿ ಕೊಡಬೇಕು.
7) ಹಿಂದುಳಿದ ವರ್ಗ. ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿತ ಮಾಡಿರುವ ಆದೇಶ ರದ್ದಾಗಬೇಕು. 50 ವಿದ್ಯಾರ್ಥಿಗಳಿಗೆ 3 ಜನ ಸಿಬ್ಬಂದಿಯಂತೆ ಹಿಂದಿನ ಪದ್ದತಿ ಮುಂದುವರಿಸಬೇಕು.
8) ಪ್ರತಿ ತಿಂಗಳು 5ನೇ ತಾರೀಖು ರಂದು ಸಂಬಳ ಕೊಡಬೇಕು. ಬಾಕಿ ಇರುವ ಸಂಬಳವನ್ನು ತಕ್ಷಣ ಪಾವತಿ ಮಾಡಬೇಕು. 10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಎಲ್ಲರನ್ನೂ ತರಬೇಕು.
9) ಬಿಸಿಎಂ ಇಲಾಖೆಯಲ್ಲಿ ಕೆಲಸ ಕಳೆದು ಕೊಂಡಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ಮತ್ತೆ ಮರು ನೇಮಕ ಮಾಡಿಕೊಳ್ಳಬೇಕು. ಹೊಸದಾಗಿ ಪ್ರಾರಂಭ ಮಾಡುವ ಹಾಸ್ಟೆಲ್ಗಳಿಗೆ ಕಡ್ಡಾಯವಾಗಿ ಕೆಲಸಕ್ಕೆ ತೆಗೆದುಕೊಳ್ಳಬೇಕು.
10) ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರಿಂದ ಶೌಚಾಲಯ ಸ್ವಚ್ಚ ಮಾಡಿಸಬಾರದು.
11) ವಸತಿ ನಿಲಯ ಮತ್ತು ಹಾಸ್ಟೆಲ್ ಗಳಿಗೆ ವಾರ್ಡನ್ ರವರು ಮಕ್ಕಳ ಆಡುಗೆಗೆ ಅಗತ್ಯವಾಗಿ ಬೇಕಾದ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಸರಿಯಾದ ಪ್ರಮಾಣದಲ್ಲಿ ತಂದು ಕೊಡಬೇಕು.
12) ನಿವೃತ್ತಿ ನಂತರ ಜೀವನ ನಿರ್ವಹಣೆಗೆ 10 ಲಕ್ಷ ಪರಿಹಾರ ಕೊಡಬೇಕು. ಎಂದು ಬೇಡಿಕೆಗಳ ಮನವಿ ಜಿಲ್ಲಾಧಿಕಾರಿ ಯಾದಗಿರಿ ರವರಿಗೆ ಸಲ್ಲಿಸಿದರು.