ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

 

ರಾಮಕೃಷ್ಣ ಅಲಿಯಾಸ್ ಹರೆ ಕೃಷ್ಣ, ಸೋಮಶೇಖರ ಅಲಿಯಾಸ್ ಪಾಟೀಲ್ ಹಾಗೂ ಗುರು ಎಂಬವರು ಬಂಧಿತರು. ಈ ಆರೋಪಿಗಳಿಂದ ಭ್ರೂಣ ಪತ್ತೆಗೆ ಬಳಸುತ್ತಿದ್ದ ಎರಡು ಸ್ಕ್ಯಾನಿಂಗ್ ಯಂತ್ರಗಳು ಮತ್ತು ಒಂದು ಕಾರನ್ನು ತನಿಖಾ ತಂಡ ವಶಪಡಿಸಿಕೊಂಡಿದೆ ಎಂದು ತಿಳಿದು ಬಂದಿದೆ.

 

ಈ ಪ್ರಕರಣಗಳಲ್ಲಿ ಈಗಾಗಲೇ 12 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಕೃತ್ಯಕ್ಕೆ ಬಳಸುತ್ತಿದ್ದ ಎರಡು ಸ್ಕ್ಯಾನಿಂಗ್ ಉಪಕರಣಗಳು ಹಾಗೂ ಮೂರು ಕಾರುಗಳನ್ನು ಮತ್ತು ಮೊಬೈಲ್‌ಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ.

 

12 ಜನ ಬಂಧಿತರಲ್ಲಿ ಪ್ರಕರಣದ ಪ್ರಮುಖ ಆರೋಪಿ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಅಭಿಷೇಕ್, ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ವಿರೇಶ್ ಕೂಡ ಸೇರಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಆರೇಳು ಆರೋಪಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ವರದಿ ಹೇಳಿದೆ.